ಗಣೇಶೋತ್ಸವ 2020 ಆಚರಣೆ ಸಂಬಂಧ ಸರ್ಕಾರದ   ಮಾರ್ಗದರ್ಶನ ಮತ್ತು ಸೂಚನೆಗಳು

ರಾಮನಗರ: ಕೋವಿಡ್‍ 19 ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಬಾರಿಯ ಗಣೇಶೋತ್ಸವಕ್ಕೆ ನಿರ್ಬಂಧಗಳನ್ನು ಹೇರಿದೆ. ಕೇಂದ್ರ ಸರ್ಕಾರ  ಆಗಸ್ಟ್ 31ರವರೆಗೆ ಯಾವುದೇ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್‍ ಸಭೆಗಳನ್ನು ಆಯೋಜನೆಗೆ  ಅವಕಾಶ ಕೊಟ್ಟಿಲ್ಲ. ಹೀಗಾಗಿ ಆಗಸ್ಟ್ 28ರಂದು ಆಚರಿಸಬೇಕಾದ ಗಣೇಶೋತ್ಸವಕ್ಕೆ ಸರ್ಕಾರ ಮುಕ್ತ ಅವಕಾಶವಿಲ್ಲ ಎಂದು ಹೇಳಿದೆ.

ಸರ್ಕಾರದ ಆದೇಶ ಕಂಇ 158 ಟಿಎನ್‍ ಆರ್‍ 2020, ದಿನಾಂಕ 14.08.2020ರ ಆದೇಶದಲ್ಲಿರುವ  ಒಕ್ಕಣೆ ಇಲ್ಲಿದೆ:

ಗಣೇಶೋತ್ಸವ ಆಚರಿಸುವ ಸಂಬಂಧದ ಮಾರ್ಗ‍ ಸೂಚಿಗಳು:

1. ಶ‍್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದ ಒಳಗೆ ಅಥವಾ ತಮ್ಮ ಮನೆಗಳಲ್ಲೇ ಆಚರಿಸುವುದು.

2.  ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳ (ಉದಾ: ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ)ಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.

3.  ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡತಕ್ಕದ್ದಲ್ಲ.

4. ಶ್ರೀ ಗಣೇಶೋತ್ಸವದಲ್ಲಿ ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ/ ಮಾಡತಕ್ಕದ್ದಲ್ಲ.  ಇದನ್ನು ಸಂಪೂರ್ಣವಾಗಿ ನಿಬಂಧಿಸಿದೆ.

5.  ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲೇ ವಿಸರ್ಜನೆ ಮಾಡುವುದು.

6.  ಶ್ರೀ ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್‍ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್‍ ಹಾಗೂ ಥರ್ಮಲ್‍ ಸ್ಕ್ರೀನಿಂಗ್‍ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ  ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

7.  ಕೋವಿಡ್‍ 19 ಸಾಂಕ್ರಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಠ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್‍ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

8.  ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್‍, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ  ಎಲ್ಲಾ ಆದೇಶ/ ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

9.  ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ-ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

10.  ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ  ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್‍ 188ರ  ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು, ಬೆಂಗಳೂರು.