ಬೆಂಗಳೂರು: ರಾಮನಗರ ಜಿಲ್ಲಾ ಕೇಂದ್ರದಲ್ಲಿ ಇದೇ 22ರಂದು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು, ವಿದೇಶಾಂಗ ಸಚಿವ ಎಸ್.ಜೈಶಂಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಈ ವಿಚಾರವನ್ನು ಐಟಿ-ಬಿಟಿ, ಕೌಶಲ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಪ್ರಕಟಿಸಿದ್ದಾರೆ.
ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯವನ್ನು ಸಚಿವರು ತಿಳಿಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಜಿಲ್ಲೆಯ ಎಲ್ಲ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಅಮೃತ ಮಹೋತ್ಸವದಲ್ಲಿ ಪಾಲ್ಗೊಳುವ ಯುವ ಸಮುದಾಯಕ್ಕೆ ದೇಶದ ಸ್ವಾತಂತ್ರ್ಯ ಪೂರ್ವ, ನಂತರದ ವಿಚಾರಗಳನ್ನು ತಿಳಿಸಿಕೊಡುವ ಜತೆಗೆ ಭವಿಷ್ಯದಲ್ಲಿ ದೇಶಕ್ಕೆ ಏನು ಕೊಡುಗೆ ನೀಡ ಬೇಕು ಎಂಬ ವಿಚಾರಗಳನ್ನು ತಿಳಿಸಿಕೊಡಬೇಕಾಗಿದೆ ಎಂದರು.
ಕಾರ್ಯಕ್ರಮ ಬೃಹತ್ ಸ್ವರೂಪದಲ್ಲಿ ನಡೆಯಲಿದೆ, ಜನರು ಸಹ ಗಣನೀಯ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮದ ಜಾಗವನ್ನು ತ್ವರಿತವಾಗಿ ನಿರ್ಧರಿಸಬೇಕಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಸಂತೋಷ್ ಬಾಬು ಅವರು ರಾಮನಗರದಿಂದ ವರ್ಚುಯಲ್ ನಲ್ಲಿ ಭಾಗವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್, ಕಲಾವಿದೆ ವೀಣಾಮೂರ್ತಿ ಇದ್ದರು. ಬೆಂಗಳೂರು ವಿವಿಗೆ ಕಾರ್ಯ ಆಯೋಜನೆಯ ಉಸ್ತುವಾರಿ ನೀಡಲಾಗಿದೆ. ರಾಮನಗರ ಪಿಜಿ ಸೆಂಟರ್ ನಿರ್ದೇಶಕ ರಾಮಕೃಷ್ಣ ಇದ್ದರು.
You must be logged in to post a comment.