ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಏ.26ಕ್ಕೆ ಮತದಾನ

* ರಾಮನಗರ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳು

* ಜೂ.4ರಂದು ರಾಮನಗರದಲ್ಲೇ ಮತ ಎಣಿಕೆ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024ರಂದು ಚುನಾವಣೆ ನಡೆಯಲಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ನಗರದಲ್ಲಿರುವ ಜಿಲ್ಲಾ ಕಚೇರಿಗಳ ಸಂಕಿರ್ಣದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಲೋಕಸಭಾ ಚುನಾವಣೆಗಳು ಎರಡು ಹಂತದಲ್ಲಿ ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಮೊದಲನೇ ಹಂತದಲ್ಲಿ ನಡೆಯಲಿದೆ ಎಂದರು.

ಚುನಾವಣಾ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಮಾರ್ಚ್16ರ ಶನಿವಾರ  ಸಂಜೆುಂದಲೇ ಆರಂಭವಾಗಿದೆ. ಮಾರ್ಚ್ 28ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ರಾಮನಗರ ಜಿಲ್ಲಾ ಕೇಂದ್ರದಲ್ಲಿರುವ ಡೀಸಿ ಕಚೇರಿಯಲ್ಲಿ ನಾಮಪತ್ರಗಳನ್ನು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ವೀಕರಿಸಲಾಗುವುದು. ಏಪ್ರಿಲ್ 3 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏಪ್ರಿಲ್ 5 ನಾಮಪತ್ರಗಳ ಪರಿಶೀಲನೆ, ಏಪ್ರಿಲ್ 8 ನಾಮಪತ್ರಗಳನ್ನು ಹಿಂಪಡೆಯಲು ಕೊನೆ ದಿನ. ಏಪ್ರಿಲ್ 26ರಂದು ಮತದಾನ ನಡೆಯಲಿದೆ ಎಂದು ಅವರು ವಿವರಿಸಿದರು.

ಮತ ಎಣಿಕೆ ರಾಮನಗರದಲ್ಲೇ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ರಾಮನಗರದ ಅರ್ಚಕರಹಳ್ಳಿ ಬಳಿ ಇರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 4ರಂದು ನಡೆಯಲಿದೆ ಎಂದರು.

ತಪ್ಪದೆ ಮತ ಚಲಾಯಿಸಿ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ, ಕುಣಿಗಲ್, ಬೆಂಗಳೂರು ನಗರದ ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ ಮತ್ತು ಆನೆಕಲ್ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಈ ಕ್ಷೇತ್ರ ವ್ಯಾಪ್ತಿಯ ಮತದಾರರು ತಪ್ಪದೆ ಏಪ್ರಿಲ್ 26ರಂದು ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

11 ಮಂದಿ ಗಡಿಪಾರಿಗೆ ಶಿಪಾರಸ್ಸುಎಸ್ಪಿ

ಪತ್ರಿಕಾಗ್ಠೋಯಲ್ಲಿ ಹಾಜರಿದ್ದ ಎಸ್ಪಿ ಕಾರ್ತಿಕ್ ರೆಡ್ಡಿ ಮಾತನಾಡಿ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸೂಕ್ಷ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ವಿಚಾರದಲ್ಲಿ ಎಚ್ಚರಿಕೆ ವಹಿಸಲಾಗುವುದು. ರಾಮನಗರ ಜಿಲ್ಲೆಯಲ್ಲಿ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ 1193 ಮಂದಿ ಇದ್ದಾರೆ. ಈ ಪೈಕಿ 1105 ಮಂದಿಯ ವಿರುದ್ದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. 11 ಮಂದಿಯ ಗಡಿ ಪಾರಿಕೆ ಶಿಪಾರಸ್ಸು ಮಾಡಲಾಗಿದೆ ಎಂದು ವಿವರಿಸಿದರು. ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು.

ಅಕ್ರಮಗಳ ಬಗ್ಗೆ ತೀವ್ರ ನಿಗಾಸಿಇಒ ದಿಗ್ವಿಜಯ್ ಬೋಡ್ಕೆ

2024ರ ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ 17 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅಕ್ರಮವಾಗಿ ಹಣ ಸಾಗಾಟ, ಮಧ್ಯ ಮತ್ತು ವಸ್ತುಗಳ ಅಕ್ರಮ ಸಾಗಾಟದ ಮೇಲೆ ನಿಗಾವಹಿಸಲಾಗುವುದು. ಕಾನೂನು ಪ್ರಕಾರ ಕ್ರಮವಹಿಸಲಾಗುವುದು ಎಂದರು.

ಮತದಾನದ ಮಹತ್ವ ತಿಳಿಸಿ ಮತದಾನ ಮಾಡುವಂತೆ ಮತದಾರರನ್ನು ಪ್ರೋತ್ಸಾಹಿಸಲು, ಕಾರ್ಯಕ್ರಮಗಳು ನಡೆಯಲಿವೆ ಎಂದರು.