ಶ್ರೀರಂಗ ಏತ ನೀರಾವರಿ ಯೋಜನೆ ವರ್ಷದೊಳಗೆ ಪೂರ್ಣ: ಡಿಸಿಎಂ ಡಾ.ಸಿ.ಎನ್‍.ಅಶ್ವತ್ಥನಾರಾಯಣ ಭರವಸೆ

ಮುಂದಿನ ಸಂಪುಟ ಸಭೆಯಲ್ಲಿ  324.67 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ 

ಮಾಗಡಿ ಮತ್ತು ಕುಣಿಗಲ್ ತಾಲೂಕುಗಳ 277 ಹಳ್ಳಿಗಳಿಗೆ ನೀರುದೊಗಿಸುವ ಯೋಜನೆ

ರಾಮನಗರ, ಜೂನ್‍ 5:ಕುಂಟುತ್ತ, ತೆವಳುತ್ತಾ ಸಾಗುತ್ತಿದ್ದ ಶ್ರೀರಂಗ ಯೋಜನೆಗೆ ಚರುಕು ನೀಡಲು ಡಿಸಿಎಂ ಡಾ.ಸಿ.ಎನ್. ಅಶ್ವಥನಾರಾಯಣ ಮನಸ್ಸು ಮಾಡಿದ್ದಾರೆ.

ಶ್ರೀರಂಗ ಏತ ನೀರಾವರಿ ಯೋಜನೆಯ ಪ್ರಗತಿ ಕುರಿತಂತೆ ಬೆಂಗಳೂರಿನಲ್ಲಿ ಶುಕ್ರವಾರ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಭೆ ನಡೆಸಿದ್ದಾರೆ. ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಕೊಟ್ಟಿದ್ದಾರೆ. ಶ್ರೀರಂಗ ಯೋಜನೆಯ 324.67 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯುವುದಾಗಿ  ಅವರು ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ 277 ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ ಯೋಜನೆಗೆ 2017ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು.

2014ರಿಂದ ಕುಂಟುತ್ತಾ ಸಾಗಿರುವ ಈ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಬೇಕು. ಅದಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನಪಡಿಸಿಕೊಳ್ಳಲು ಇರುವ ತೊಡಕುಗಳನ್ನು ತಕ್ಷಣ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟಾಜ್ಞೆ ಮಾಡಿದ್ದಾರೆ.

ಮಾಗಡಿ ತಾಲೂಕಿನ 211 ಹಳ್ಳಿಗಳು, ಕುಣಿಗಲ್ ತಾಲೂಕಿನ 66 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ. ಇದರಿಂದಾಗಿ ಮಾಗಡಿಯ 66 ಕೆರೆಗಳು, ಕುಣಿಗಲ್‌ನ 17 ಕೆರೆಗಳನ್ನು ತುಂಬಿಸಲು ಸಹಕಾರಿಯಾಗಲಿದೆ. ಹೇಮಾವತಿ ನದಿಯಿಂದ ಏತ ನೀರಾವರಿ ಮೂಲಕ ಹರಿಸುವ 277.5 ಕೋಟಿ ರೂ. ವೆಚ್ಚದ ಯೋಜನೆಯನ್ನು 2014ರಲ್ಲಿ ಆರಂಭಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಕಾಮಗಾರಿ ಅ‘ರ್ಕ್ಕೆ ನಿಂತಿತ್ತು. ತದ ನಂತರ 2017ರಲ್ಲಿ ಈ ಯೋಜನೆಗೆ ಮತ್ತೆ ಚಾಲನೆ ದೊರಕಿತ್ತು. ಇಲ್ಲಿಯವರೆಗೆ ಸುಮಾರು 163.38 ಕೋಟಿ ರೂ. ವೆಚ್ಚದ ಕಾಮಗಾರಿ ಆಗಿದೆ.

ಯೋಜನಾ ವೆಚ್ಚದಲ್ಲಿ ಏರಿಕೆ ಏಕೆ?

ಭೂಸ್ವಾಧೀನ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗುವುದನ್ನು ತಪ್ಪಿಸಲು 277 ಕಿ.ಮೀ. ಉದ್ದದ ರಸ್ತೆ ಬದಿ ಗ್ರ್ಯಾವಿಟಿ ಮೈನ್ ಪೈಪ್ ಅಳವಡಿಸಲು ನಿರ್ಧರಿಸಿದ್ದರಿಂದ ಯೋಜನೆಗೆ 53.42 ಕೋಟಿ ರೂ. ಹೆಚ್ಚುವರಿ ಅನುದಾನ ಬೇಕಾಗಿದ್ದು, ಯೋಜನಾ ವೆಚ್ಚ 324.67 ಕೋಟಿ ರೂ.ಗೆ ಏರಿಕೆಯಾಗಿದೆ. ಈಗಾಗಲೇ ಪರಿಷ್ಕೃತ ಅಂದಾಜು ಸಿದ್ಧವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಸಚಿವರು  ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಭೂಸ್ವಾಧೀನ ತ್ವರಿತಗೊಳಿಸಲು ಸೂಚನೆ

ಯೋಜನೆಗೆ ರಾಮನಗರ ಜಿಲ್ಲೆಯಲ್ಲಿ 57 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, 14 ಎಕರೆ, 24 ಗುಂಟೆ ಜಮೀನನ್ನು ನೇರ ಖರೀದಿ ಮೂಲಕ ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕುಣಿಗಲ್ ತಾಲೂಕಿನಲ್ಲಿ 23 ಎಕರೆ ಜಮೀನು ಬೇಕಾಗಿದ್ದು, ರೈತರು ಭೂಮಿ ನೀಡಲು ಸಿದ್ಧರಿಲ್ಲ. ಹೀಗಾಗಿ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನ (ಎಸ್‌ಐಎ) ನಡೆಸಲು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಇದಕ್ಕೆ ಇರುವ ತೊಡಕುಗಳನ್ನು ತಕ್ಷಣವೇ ಬಗೆಹರಿಸಿ ಅಗತ್ಯ ಭೂಮಿ ಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದಿದ್ದಾರೆ.

ಸಭೆಯಲ್ಲಿ ಮಾಗಡಿ ಶಾಸಕ ಎ.ಮಂಜುನಾಥ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ ಸಿಂಗ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.